Tuesday 25 June 2013

ವಿವಾಹ ವಿಚ್ಛೇದನ ; ನವ ದಂಪತಿಗಳ ಸೀಳು ಜೀವನ


                                                                                         -ಎಂ. ಗಣಪತಿ ಕಾನುಗೋಡು
ವಿವಾಹ ವಿಚ್ಛೇದನ ಹೊಸತಲ್ಲ. ಹಿಂದಿನ ಕಾಲದಲ್ಲಿ ವಿಚ್ಛೇದನ ಹೆಚ್ಚಾಗಿ ಪುರುಷ ಮೂಲವಾಗಿತ್ತು. ಪ್ರಸ್ತುತ ಮುಂದುವರೆದ ಸನ್ನಿವೇಶದಲ್ಲಿ ಪತಿಯರಷ್ಟೇ ಅಲ್ಲ ಅದಕ್ಕಿಂತ ಹೆಚ್ಚಾಗಿ ಪತ್ನಿಯರೇ ವಿಚ್ಛೇದನ ಬಯಸುವುದು ಕಂಡುಬರುತ್ತಿದೆ. 
ಇದಕ್ಕೆ ಕಾರಣ ಹಲವಾರು. ಹೆಣ್ಣುಮಕ್ಕಳಿಗೆ ಈ ವಿಷಯದಲ್ಲಿ ಕಾನೂನಿನ ಸವಲತ್ತು ಹಿಂದಿನಿಗಿಂತ ಈಗ ಹೆಚ್ಚಾಗಿದೆ. ವಿವಾಹವಾಗಿ ಮೂರು ವರ್ಷದೊಳಗೆ ದಾಂಪತ್ಯದಲ್ಲಿ ವಿರಸ ಬಂದರೆ ಪತ್ನಿಯಾದವಳು ತನ್ನ ಗಂಡ, ಅತ್ತೆ ಮಾವಂದಿರನ್ನು ಜೈಲಿನಲ್ಲಿ ಇರಿಸುತ್ತಾಳೆ. ವಿರಸಕ್ಕೆ ಕಾರಣವೇನಿದ್ದರೂ ವರದಕ್ಷಿಣೆಯ ಕಾನೂನು. ವರದಕ್ಷಿಣೆಯ ವಿಚಾರವನ್ನೇ ಹುಟ್ಟುಹಾಕಿ ಪತಿಯ ಮತ್ತು ಅವರ ಪೋಷಕರ ಮಗ್ಗಲು ಮುರಿಯುವಲ್ಲಿ ಬಳಕೆಯಾಗುತ್ತಿದೆ. ದುರುಪಯೋಗವಾಗುತ್ತಿದೆ ಕೂಡಾ. ತಂದೆಯ ಮನೆಯ ಆಸ್ತಿಯಲ್ಲಿ ಸಮಹಕ್ಕನ್ನು ಪಡೆದ ನಂತರವೂ ಗಂಡ ಬೇಡವೆಂದೆನಿಸಿದರೂ ಅವನ ಆಸ್ತಿ ಮತ್ತು ಸಂಪತ್ತು ಬೇಡವೆನಿಸುವುದಿಲ್ಲ. ಅದರಲ್ಲಿ ಪಾಲು ಕೇಳುವಷ್ಟು ಕಾನೂನಿನ ಬೆಂಬಲ ಅವಳಿಗಿದೆ. ಮಕ್ಕಳಿದ್ದರೆ ಮಕ್ಕಳ ಪೋಷಣೆ ತನ್ನ ಬದುಕಿನ ರಕ್ಷಣೆಗೆಂದು ಗಂಡನನ್ನ ದೋಚುವ ಸ್ಥಿತಿಯಲ್ಲಿ ಅವಳಿದ್ದಾಳೆ. ಇದು ವಿಚ್ಛೇದನದತ್ತ ಮುನ್ನುಗ್ಗುವಲ್ಲಿ ಮಹಿಳೆಗೆ ಇರುವ ಕಾನೂನಿನ ಬೆಂಬಲ. 
ಇಂದು ಹೆಣ್ಣುಮಕ್ಕಳು ಗಂಡುಮಕ್ಕಳಿಗೆ ಸರಿಸಮಾನಾಗಿ ಶಿಕ್ಷಣವನ್ನು ಹೊಂದಿದ್ದಾರೆ. ಅವರಂತೆಯೇ ದೊಡ್ಡ ಹುದ್ದೆಯನ್ನೇರಿ ಹೆಚ್ಚು ಸಂಪಾದಿಸುತ್ತಿದ್ದಾರೆ. ಇಲ್ಲಿ ಯಾರಿಗೆ ಯಾರೂ ಕಡಿಮೆಯಿಲ್ಲ. ಕೂಡಿ ನಡೆಯುವಲ್ಲಿ ಅಗತ್ಯವಾದ ಶ್ರೇಷ್ಠತೆ ಮತ್ತು ಅಧೀನತೆಯ ನಡವಳಿಕೆ ಇಲ್ಲಿ ಶೂನ್ಯ. ಯಾರಿಗೆ ಯಾರೂ ಸೋತು ಸರಿಯುವುದಿಲ್ಲ. ಎರಡು ಮೇರು ಒಂದೇ ಬಿಂದುವಿನಲ್ಲಿ ಘರ್ಷಣೆಯೇ ಝಣಝಣವಾಗುತ್ತದೆ. ವಿರಸಕ್ಕೆ ವಿಷಯ ದೊಡ್ಡದು ಬೇಕಿಲ್ಲ. ಎಲ್ಲರ ಗಡಿಯಾರವೂ ಕೆಲವೇ ಸೆಕೆಂಡುಗಳಲ್ಲಿ ಅಂತರದಲ್ಲಿ ಒಂದೇ ಸಮಯವನ್ನು ತೋರಿಸುತ್ತದೆ. ದಾಂಪತ್ಯ ಒಂದೇ ಆದರೂ ಅಭಿಪ್ರಾಯಗಳ ಅಂತರ ಗಡಿಯಾರದ ಸೆಕೆಂಡುಗಳ ಅಂತರದಷ್ಟೇ. ಅಂತಿಮ ಪರಿಣಾಮ ವಿಚ್ಛೇದನ. ಇಬ್ಬರಿಗೂ ಇರುವ ಸಂಪಾದನೆಯೇ ಇದಕ್ಕೆ ಕಾರಣ. 
ಇಂದಿನ ಕುಟುಂಬಗಳಲ್ಲಿ ಮಕ್ಕಳಿಗೆ ಸಹಬಾಳ್ವೆಯ ಮನೋಭಾವವನ್ನು ಕಲಿಸುವ ಅವಕಾಶ ಕಡಿಮೆ. ಶಿಕ್ಷಣದ ಕಾರಣದಿಂದ ಅವರ ಬುದ್ಧಿ ಬೆಳವಣಿಗೆಯ ಪ್ರಾರಂಭದಿಂದ ಕುಟುಂಬದ ಹೊರಗೆ ಬೆಳೆದು ವಿವಾಹದ ಹಂತಕ್ಕೆ ಬಂದಿರುತ್ತಾರೆ. ಕುಟುಂಬದ ಹಿರಿಯರು-ಕಿರಿಯರು, ಹುಟ್ಟಿನ ನೆರೆಹೊರೆಯವರು, ಸಂಬಂಧಿಕರು ಎನ್ನುವ ಸಾಮಾಜಿಕ ಜೀವನದ ಪ್ರಾಥಮಿಕ ಸಂಘಗಳ ಒಡನಾಟವೇ ಇಂದಿನ ಯುವಜನತೆಗೆ ದೊರಕುವುದಿಲ್ಲ. ಶಾಲಾ ಕಾಲೇಜುಗಳಲ್ಲಿ ಅವರಿಗೆ ದೊರಕುವುದು ವಿಷಯಗಳ ಜ್ಞಾನವಷ್ಟೇ. ಬದುಕಿನ ಅರಿವಲ್ಲ. ಸಹಬಾಳ್ವೆ, ಬದುಕಿನ ನೀತಿಯನ್ನು ಅವರಿಗೆ ತಿಳಿಯುವ ಅವಕಾಶ ಕಡಿಮೆ. ಕೂಡಿ ಬದುಕುವ ಬುದ್ಧಿ ಬರುವಷ್ಟರ ಹೊತ್ತಿಗೆ ಆಗುವ ಪ್ರಮಾದವೆಲ್ಲ ಆಗಿ ಯುವಜನರು ಮುದುಕರಾಗಿರುತ್ತಾರೆ. 
ಈಗ ಕೇವಲ ಎರಡು ಅಥವಾ ಒಂದೇ ಮಗುವಾದ್ದರಿಂದ ತಾಯಿ ತಂದೆಯರು ಅವರನ್ನು ಅತೀ ಮುದ್ದಿನಿಂದ ಸಾಕಿರುತ್ತಾರೆ. ಮುದ್ದಿನ ಅಮಲಿನಲ್ಲಿ ಬದುಕಿನ ಕಲೆಯ ನೆಲೆ ಕಮರಿ ಹೋಗಿದೆ. ಗಂಡು-ಹೆಣ್ಣು ಮಕ್ಕಳು ದಾಂಪತ್ಯದಲ್ಲಿ ಹೊಂದಿಕೊಳ್ಳದೆ ಸಿಡಿದು ಹೋಗಲು ಇದು ಪ್ರಮುಖ ಕಾರಣ. 
ಗಂಡ ಹೆಂಡತಿಯರಿಬ್ಬರೂ ಮನೆಯ ಹೊರಗೆ ಪ್ರತ್ಯೇಕ ಪ್ರತ್ಯೇಕವಾಗಿ ದುಡಿಮೆಗಾಗಿ ಹೊರಗಿರುವ ಸಂದರ್ಭದಲ್ಲಿ ಕೆಲವೊಮ್ಮೆ ಚಾರಿತ್ರಿಕವಾಗಿ ಒಬ್ಬರನ್ನೊಬ್ಬರು ಸಂಶಯ ದೃಷ್ಟಿಯಿಂದ ನೋಡುವುದೂ ಉಂಟು. ಸ್ವಯಂ ಉದ್ಯೋಗಿಗಳಾಗಿದ್ದರಿಂದ ಕುಟುಂಬದ ಹಿರಿಯರಿಂದ ಸಹಜವಾಗಿ ದೂರವಿದ್ದು ಪತಿ ಪತ್ನಿಯರಿಬ್ಬರೇ ಪುಟ್ಟ ಕುಟುಂಬ ಮಾಡಿಕೊಂಡಿರುತ್ತಾರೆ. ಇಬ್ಬರಲ್ಲಿ ಭಿನ್ನಾಭಿಪ್ರಾಯ ಮೂಡಿದಾಗ ತಕ್ಷಣ ಸರಿಮಾಡಲು ಅಲ್ಲಿ ಯಾರೂ ಇರುವುದಿಲ್ಲ. ಪರಿಣಾಮ ಲಗಾಮಿಲ್ಲದೆ ಕುದುರೆಯಂತೆ ದಾಂಪತ್ಯ ವಿಘಟನೆಯಾಗುತ್ತದೆ. 
ಇಂದಿನ ದಂಪತಿಗಳು ಯೋಚಿಸಬೇಕಾದದ್ದಿಷ್ಟೇ. ಇದ್ದಲ್ಲಿಯೇ ಕಾಡಿ ಕೂಡಿ ಬಾಳ್ವೆ ನಡೆಸಬೇಕು. ಹೊಂದಿಕೊಳ್ಳುವ ಮನೋಭಾವ ಇಲ್ಲದವರು ಯಾರನ್ನ ಬಿಟ್ಟು ಯಾರನ್ನ ಕೂಡಿಕೊಂಡರೂ ಇದೇ ಪಾಡು. ಹೊಂದಿಕೊಂಡು ಮುನ್ನಡೆಯಬೇಕೆಂದಿದ್ದರೆ ಒಬ್ಬರಿಗೆ ಒಬ್ಬರು ಆಯಾ ಸಂದರ್ಭಕ್ಕೆ ಅನುಸಾರವಾಗಿ ಬಗ್ಗಿ ನಡೆಯಬೇಕಾದದ್ದು ಅಗತ್ಯ. ಸುಖಕ್ಕಾಗಿ ಪರದಾಡಿ ಮುದುಕರಾಗುವ ಮುಂಚೆ ಇದ್ದಲ್ಲಿಯೇ ಸಾವರಿಸಿಕೊಂಡು ನೆಮ್ಮದಿಯಿಂದ ಇರುವುದು ಲೇಸು. ಸುಖ ಎನ್ನುವುದು ಅವರವರ ಮನೋಗತಿಗೆ ಬಿಟ್ಟ ವಿಚಾರ.


 ಎಂ. ಗಣಪತಿ M.A.. ಕಾನುಗೋಡು 
 ಅಂಚೆ : ಬಿ.ಮಂಚಾಲೆ-577431
ತಾಲ್ಲೂಕು, ಸಾಗರ, ಜಿಲ್ಲೆ ಶಿವಮೊಗ್ಗ
ಮೊ.: 9481968771
 E-mail: mgkangod.blogspot.com

No comments:

Post a Comment

Note: only a member of this blog may post a comment.